ಆತ್ಮೀಯ ಬಂಧು, ನಮಸ್ಕಾರ, ವಿ.ಆರ್.ಭಟ್ ತಮಗೆ ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತಿದ್ದೇನೆ

Saturday, July 31, 2010

ಭಕ್ತಿ-ಶ್ರದ್ಧೆ-ಸೇವೆ


ಭಕ್ತಿ-ಶ್ರದ್ಧೆ-ಸೇವೆ

ಯಾತ್ರೆ ಹೋಗಲುಬೇಕು ತೀರ್ಥಕ್ಷೇತ್ರಂಗಳಿಗೆ
ಜಾತ್ರೆ ನೋಡಲು ಜನರ ಬಹುರೂಪಗಳನು
ಮಾತ್ರೆ ನುಂಗುವ ಬದಲು ರಕ್ತದೊತ್ತಡವದಕೆ
ಸೂತ್ರ-ಮನಮುದಗೊಳಿಸು | ಜಗದಮಿತ್ರ

ಪ್ರೀತಿಸುತ ದೈವಗಳ ಪಲ್ಲಕಿಯ ಹೊರು ನೀನು
ರೀತಿಯಲಿ ಬಹುವಿಧದಿ ಪೂಜಿಸುತಲವನ
ಭೀತಿಯಿಂ ಮುಗ್ಗರಿಸಿ ಹೊರನೋಟದಲಿ ಭಜಿಸೆ
ನೀತಿಯದು ಸರಿಯಿರದು | ಜಗದಮಿತ್ರ

ಕಾವ ದೇವನ ಕಂಡು ಜಾವದಲಿ ಸರದಿಯಲಿ
ಭಾವಭಕ್ತಿಯ ಹೃದಯ ತೆರೆದಿಡುತಲವಗೆ
ಮಾವು ತೆಂಗಿನಕಾಯಿ ಜಾಜಿ-ಮಲ್ಲಿಗೆಯಿಟ್ಟು
ಜೀವಕಳೆ ನೀ ಕಾಣು | ಜಗದಮಿತ್ರ

ಪತ್ರೆಯಾದರು ಇರಲಿ ಪುಷ್ಪವಾದರು ಬರಲಿ
ಗಾತ್ರದಲಿ ಮನ ಮಾತ್ರ ಬಹುದೊಡ್ಡದಿರಲಿ
ಹತ್ರದಲಿ ಸಿಗುವಂತ ಫಲ ನೀರು ಪನ್ನೀರು
ಪಾತ್ರೆಯೊಳಗಿಟ್ಟು ಮುಗಿ | ಜಗದಮಿತ್ರ

ಹೃದಯಕಮಲದ ಮಧ್ಯೆ ಸಿಂಹಾಸನದಿ ಕುಳಿತ
ಉದಯ ನಾರಾಯಣನ ಮುದದಿಂದ ನೆನೆದು
ಬದುಕಿನಲಿ ಜೊತೆಗಾರ ಅನನ್ಯ ಸಹಕಾರ
ವಿಧಿಯವನೆ ಹಿಡಿಯವನ | ಜಗದಮಿತ್ರ

ಛತ್ರ ಚಾಮರನೀಡು ಶಯನದುತ್ಸವ ಮಾಡು
ಉತ್ತರೋತ್ತರ ನಾಮ ಸ್ಮರಣೆಯದ ಪಾಡು
ಕ್ಷಾತ್ರನಾ ಚಂಡಕೌಶಿಕ ಜಪಿಸಿ ಮುನಿಯಾದ
ಖಾತ್ರಿಯದು ನೀ ಪಡೆವೆ | ಜಗದಮಿತ್ರ

ನರ್ತಿಸುತ ಕೈಕಾಲು ದಂಡಿಸುತ ಶಿರ ಬಾಗಿ
ವರ್ತನೆಯೊಳಾದೈವ ಸಂಪ್ರೀತಗೊಳಿಸು
ವ್ಯರ್ಥಮಾಡದೆ ಸಮಯ ಅಷ್ಟಾಂಗ ಸೇವಿಸಲು
ಪಾರ್ಥಸಾರಥಿಯೊಲಿವ | ಜಗದಮಿತ್ರ